Ad Widget

ದಂತ ವೈದ್ಯರ ದಿನ – ಮಾರ್ಚ್ 6

. . . . . . . . .

ಮಾರ್ಚ್ 6 ರಂದು ವಿಶ್ವದಾದ್ಯಂತ “ದಂತ ವೈದ್ಯರ ದಿನ” ಎಂದು ಆಚರಿಸಲಾಗುತ್ತದೆ. ದಂತ ವೈದ್ಯರ ಸೇವೆಯನ್ನು ಸ್ಮರಿಸುತ್ತಾ ಅವರಿಗೊಂದು ಧನ್ಯವಾದ ಅಥವಾ ಅಭಿನಂದನೆ ತಿಳಿಸುವ ಸುದಿನ. ಅದೇಕೋ ದಂತ ವೈದ್ಯರ ಬಗೆಗಿನ ಭಯ ಜನ ಸಾಮಾನ್ಯರಲ್ಲಿ ಇನ್ನೂ ಉಳಿದಿದೆ. ದಂತ ವೈದ್ಯರು ಎಂದರೆ “ನೋವು ಉಂಟು ಮಾಡುವವರು ಎಂಬ ಹಣೆ ಪಟ್ಟಿ ಇನ್ನೂ ಪೂರ್ತಿಯಾಗಿ ಕಳಚಿ ಕೊಂಡಿಲ್ಲ. ತಲೆ ತಲಾಂತರಗಳಿoದ ದಂತ ವೈದ್ಯರನ್ನು “ಖಳ ನಾಯಕ”ನ ರೀತಿಯಲ್ಲಿ ಚಿತ್ರಿಸಲಾಗಿದೆ ಮತ್ತು ಜನಮಾನಸದಲ್ಲಿ ದಂತ ವೈದ್ಯರ ಬಗ್ಗೆ ಬೀತಿಯ ಕಲ್ಪನೆ ಇನ್ನೂ ತೊಲಗಿಲ್ಲದಿರುವುದೇ ಸೋಜಿಗರ ಮತ್ತು ದೌರ್ಭಾಗ್ಯದ ಸಂಗತಿ. ಯಾವೊಬ್ಬ ವ್ಯಕ್ತಿಯೂ ನೋವಿಲ್ಲದೇ ಇನ್ನೂ ದಂತ ವೈದ್ಯರ ಬಳಿ ಬರಲು ಹಿಂದೇಟು ಹಾಕುವುದಂತೂ ಸತ್ಯ. ದಂತ ವೈದ್ಯರ ದಂತ ಕುರ್ಚಿ ಮಾತ್ರ ಇನ್ನೂ ಹೆಚ್ಚಿನವರಿಗೆ ಮುಳ್ಳಿನ ಹಾಸಿಗೆಯಾಗಿ ಉಳಿದಿರುವುದೇ ಬಹು ದೊಡ್ಡ ಜೀರ್ಣಿಸಿಕೊಳ್ಳಲಾಗದ ಸತ್ಯ. 1790 ರ ಮಾರ್ಚ್ 6 ರಂದು ಅಮೇರಿಕಾದ ಖ್ಯಾತ ದಂತ ವೈದ್ಯ ಜಾನ್ ಗ್ರೀನ್‌ವುಡ್ ಎಂಬಾತ ಪ್ರಪ್ರಥಮ ಬಾರಿಗೆ ಕಾಲಿನಿಂದ ಚಾಲಿತವಾದ ದಂತ ಕುರ್ಚಿಯನ್ನು ಸಂಶೋಧಿಸಿದರು. ಇದರ ನೆನಪಿಗಾಗಿ ಮಾರ್ಚ್ ೬ ನ್ನು ವಿಶ್ವ ದಂತ ವೈದ್ಯರ ದಿನ ಎಂದು ಆಚರಿಸುತ್ತಾರೆ. ಭಾರತ ದೇಶದಲ್ಲಿ ಡಾ|| ಕಫಿಯುದ್ದೀನ್ ಅಹ್ಮದ್ ಅವರನ್ನು ದಂತ ವೈದ್ಯ ಶಾಸ್ತçದ ಪಿತಾಮಹ ಎಂದೂ, ವಿಶ್ವದಲ್ಲಿ ಡಾ|| ಪಿರಿಯ ಫೌಚಾರ್ಡ್ ಅವರನ್ನು ಆಧುನಿಕ ದಂತ ವೈದ್ಯಕೀಯ ಶಾಸ್ತçದ ಪಿತಾಮಹ ಎಂದೂ ಕರೆಯುತ್ತಾರೆ.
ಹಿಂದಿನ ಕಾಲದಲ್ಲಿ ವೈಜ್ಞಾನಿಕತೆ ತಂತ್ರಜ್ಞಾನ ಮತ್ತು ಕೌಶಲ್ಯಗಳ ಕೊರತೆಯಿಂದಾಗಿ ದಂತ ವೈದ್ಯಕೀಯ ಕ್ಷೇತ್ರ ಅಂದರೆ ಜನರಲ್ಲಿ ಒಂದು ರೀತಿಯ ಅವ್ಯಕ್ತ ಭಯ ಕಾಡುತ್ತಿತ್ತು. ಆದರೆ ಈಗ ಕಾಲ ಬದಲಾಗಿದೆ. ಹೊಸ ಹೊಸ ಆವಿಷ್ಕಾರ ಬಂದಿದೆ. ತಂತ್ರಜ್ಞಾನ ಮತ್ತು ವೈದ್ಯ ವಿಜ್ಞಾನದಲ್ಲಿ ಅಪಾರ ಬದಲಾವಣೆ ಉಂಟಾಗಿದೆ. ಹಾಗಾಗಿ ದಂತ ವೈದ್ಯಕೀಯ ಕ್ಷೇತ್ರ ಈಗ ಮೊದಲಿನಂತೆ ಉಳಿದಿಲ್ಲ. ದಂತ ವೈದ್ಯಕೀಯ ಆಸ್ಪತ್ರೆ ಎಂದರೆ ಯಾವುದೋ ಹೊಸ ಲೋಕಕ್ಕೆ ಎಂದoತೆ ಭಾಸವಾಗುವ ರೀತಿಯಲ್ಲಿ ಮಾರ್ಪಾಡಾಗಿದೆ. ವಿಶಾಲವಾದ ಜಾಗ, ಮೆತ್ತನೆಯ ದೇಹದಾಕೃತಿಯ ದಂತ ಕುರ್ಚಿ, ಹವಾನಿಯಂತ್ರಿಕ ವಾತಾವರಣ, ಕಿವಿಗೊಪ್ಪುವ ಲಘು ಸಂಗೀತ…ಹಾಗೇ ಬಹಳಷ್ಟು ಬದಲಾವಣೆ ಉಂಟಾಗಿದೆ. ದಂತ ವೈದ್ಯಕೀಯ ಚಿಕಿತ್ಸೆ ಈಗ ಬರೀ ನೋವು ನಿವಾರಕ ವ್ಯವಸ್ಥೆಗಿಂತಲೂ ಸೌಂದರ್ಯವರ್ಧಕ ಚಿಕಿತ್ಸೆಯಾಗಿ ಬದಲಾಗಿರುವುದು ಖಂಡಿತವಾಗಿಯೂ ಸತ್ಯ. ಇಷ್ಟೆಲ್ಲಾ ಬದಲವಣೆಯಾಗಿದ್ದರೂ ಜನರು ಮಾತ್ರ ದಂತ ವೈದ್ಯರ ಬಗ್ಗೆ ಇನ್ನೂ ತಪ್ಪು ಕಲ್ಪನೆಗಳನ್ನು ಹೊಂದಿರುವುದು ಸೋಜಿಗವೇ ಸರಿ. ಅದೇನೋ ಇರಲಿ ನಿಮ್ಮ ನೋವನ್ನು ಶಮನ ಮಾಡುವ ನಿಮ್ಮನ್ನು ಸದಾ ನಗಿಸಲು ಮತ್ತು ಹಸನ್ಮುಖಿಯಾಗಿ ಇರುವಂತೆ ಶುಭ್ರ ದಂತಪoಕ್ತಿಗಳಿಗಾಗಿ ಸದಾಕಾಲ ಶ್ರಮ ಪಡುವ ದಂತ ವೈದ್ಯರನ್ನು ಸ್ಮರಿಸುವ ಮತ್ತು ಒಂದು ಪುಟ್ಟ ಥ್ಯಾಂಕ್ಸ್ ಹೇಳುವ ದಿನ ಮಾರ್ಚ್ 06 ಎಂಬುದoತೂ ನಿಜ.
ಯಾಕಾಗಿ ದಂತ ವೈದ್ಯರ ದಿನ ಆಚರಿಸಲಾಗುತ್ತದೆ?

  1. ಬಾಯಿ ಆರೋಗ್ಯದ ಬಗ್ಗೆ ಹೆಚ್ಚಿನ ಅರಿವು ಜಾಗೃತಿ ಮೂಡಿಸುವ ಉದ್ದೇಶದಿಂದ ಆಚರಣೆ ಮಾಡಲಾಗುತ್ತಿದೆ.
  2. ದಂತ ಸಂಬ0ಧಿ ರೋಗಗಳಾದ ದಂತ ಕ್ಷಯ, ದಂತ ಕುಳಿ, ದಂತ ಸವೆತ, ದಂತ ಅತಿ ಸಂವೇದನೆ ಮುಂತಾದ ರೋಗಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸದುದ್ದೇಶದಿಂದ ಈ ಆಚರಣೆ ಮಾಡಲಾಗುತ್ತದೆ.
  3. ದಂತ ಆರೋಗ್ಯ ಮತ್ತು ಬಾಯಿ ಆರೋಗ್ಯಕ್ಕೆ ಪೂರಕವಾದ ಹವ್ಯಾಸಗಳ ಬಗ್ಗೆ ಜನರಲ್ಲಿ ಒಲವು ಮೂಡಿಸುವ ಉದ್ದೇಶದಿಂದಾಗಿ ಈ ಆಚರಣೆ ಮಾಡಲಾಗುತ್ತಿದೆ.
  4. ಮಕ್ಕಳಲ್ಲಿ ದಂತ ಸಂಬoಧಿ ರೋಗಗಳನ್ನು ತಡೆಯುವ ಬಗ್ಗೆ ಮತ್ತು ಮಕ್ಕಳಲ್ಲಿ ದಂತ ರಕ್ಷಣೆಯ ಬಗ್ಗೆ ಒಲವು ಮೂಡಿಸುವ ಉದ್ದೇಶದಿಂದ.
  5. ಮುಖ ಮನಸ್ಸಿನ ಕನ್ನಡಿ ಇದ್ದಂತೆ. ಸುಂದರವಾದ ದಂತ ಪಂಕ್ತಿಗಳಿoದ ಕೂಡಿದ ನಗು ಮುಖದ ಅಂದವನ್ನು ಹೆಚ್ಚಿಸುತ್ತದೆ. ಜನರ ಹಲ್ಲನ್ನು ಸರಿಪಡಿಸಿ ನಗುವಿನ ಮಾದಕತೆ ಹೆಚ್ಚಿಸುವಂತೆ ಪ್ರೇರೇಪಿಸಿ ರೋಗಿಗಳ ಆತ್ಮವಿಶ್ವಾಸವನ್ನು ವೃದ್ಧಿಸುವ ಸದುದ್ದೇಶದಿಂದ ಈ ಆಚರಣೆ ಮಾಡಲಾಗುತ್ತಿದೆ.
    ೬. ದಂತ ಆರೋಗ್ಯವನ್ನು ವೃದ್ಧಿಸುವ ಹವ್ಯಾಸಗಳಾದ ದಂತದಾರ ಬಳಕೆ, ದಂತ ಕುಂಚಗಳ ಸೂಕ್ತ ಬಳಕೆ, ದಂತ ಚೂರ್ಣಗಳ ಬಗ್ಗೆ ಹೆಚ್ಚಿನ ಮಾಹಿತಿ ಮತ್ತು ಮಾರ್ಗದರ್ಶನ ನೀಡುವ ಮೂಲ ಉದ್ದೇಶದೊಂದಿಗೆ ದಂತ ವೈದ್ಯರ ದಿನ ಆಚರಿಸಲಾಗುತ್ತಿದೆ.

ದಂತ ವೈದ್ಯರ ದಿನದ ಸಂದೇಶ:

  1. ದಿನಕ್ಕೆರಡು ಬಾರಿ ಕನಿಷ್ಠ ಮೂರು ನಿಮಿಷಗಳ ಕಾಲ ಹಲ್ಲುಜ್ಜಬೇಕು.
  2. ದಿನಕ್ಕೊಮ್ಮೆಯಾದರೂ ದಂತದಾರ ಅಥವಾ ದಂತ ಬಳ್ಳಿ ಬಳಸಿ ಹಲ್ಲುಗಳ ಸಂದುಗಳನ್ನು ಶುಚಿಗೊಳಿಸಿ
  3. ಕನಿಷ್ಠ ಆರು ತಿಂಗಳಿಗೊಮ್ಮೆ ದಂತ ವೈದ್ಯರನ್ನು ಭೇಟಿ ಮಾಡಬೇಕು. ಹಲ್ಲು ನೋವು ಬಂದಾಗ ಮಾತ್ರ ದಂತ ವೈದ್ಯರ ಭೇಟಿ ಮಾಡುವುದು ಸರಿಯಾದ ಕ್ರಮವಲ್ಲ.
  4. ನೀವು ಸೇವಿಸುವ ಆಹಾರದ ಮೇಲೆ ನಿಗಾ ಇರಲಿ. ಸಮತೋಲಿತ ಮತ್ತು ಹಲ್ಲಿನ ಆರೋಗ್ಯಕ್ಕೆ ಪೂರಕವಾದ ನಾರುಯುಕ್ತ ಹಣ್ಣು ಹಂಪಲು, ಹಸಿ ತರಕಾರಿಯುಕ್ತ ಆಹಾರ ಸೇವಿಸಿ. ಇಂಗಾಲಯುಕ್ತ ಕೃತಕ ಪೇಯಗಳನ್ನು ತ್ಯಜಿಸಬೇಕು. ತಾಜಾ ಹಣ್ಣಿನ ರಸ, ಕಬ್ಬಿನ ಹಾಲು ಎಳನೀರು ಮುಂತಾದ ನೈಸರ್ಗಿಕ ಪೇಯಗಳನ್ನು ಸೇವಿಸಬೇಕು.
  5. ಎರಡೂ ಊಟಗಳ ನಡುವೆ ಸಿಹಿ ಪದಾರ್ಥ ಮತ್ತು ಅಂಟು ಪದಾರ್ಥಗಳನ್ನು ಸೇವಿಸುವುದನ್ನು ಕಡಿಮೆ ಮಾಡಿ. ಅನಿವರ‍್ಯವಾದಲ್ಲಿ ಸೇವಿಸಿದ ಬಳಿಕ ಚೆನ್ನಾಗಿ ಬಾಯಿ ಮುಕ್ಕಳಿಸಬೇಕು.
  6. ಪ್ರತಿ ನಿತ್ಯ ರಾತ್ರಿ ಮಲಗುವ ಮುನ್ನ ಮೌತ್‌ವಾಶ್ ಬಳಸುವ ಹವ್ಯಾಸ ಮಾಡಿಕೊಳ್ಳಿ. ಕನಿಷ್ಠ ಪಕ್ಷ ಬಿಸಿ ನೀರಿಗೆ ಒಂದು ಚಿಟಿಕೆ ಉಪ್ಪುಹಾಕಿ. ಆ ದ್ರಾವಣದಿಂದ ಬಾಯಿ ಶುಚಿಗೊಳಿಸಬೇಕು.
  7. ಪ್ರತಿ ವರ್ಷದಲ್ಲಿ ಒಮ್ಮೆಯಾದರೂ ದಂತ ವೈದ್ಯರ ಬಳಿ ಹಲ್ಲು ಶುಚಿಗೊಳಿಸಬೇಕು. ಇದರಿಂದ ಬಾಯಿವಾಸನೆ, ವಸಡಿನ ಉರಿಯೂತ ಮತ್ತು ವಸಡಿನಲ್ಲಿ ರಕ್ತ ಒಸರುವುದು ನಿಯಂತ್ರಣಕ್ಕೆ ಬರುತ್ತದೆ.
  8. ಹಲ್ಲುನೋವು ಬಂದಾಗ ಸ್ವಯಂ ಔಷಧಿಗಾರಿಕೆ ಮಾಡಿಕೊಂಡು ನೋವು ನಿವಾರಕ ಔಷಧಿ ತೆಗೆದುಕೊಳ್ಳುವುದು ಬಹಳ ಅಪಾಯಕಾರಿ. ದಂತ ವೈದ್ಯರ ಸಲಹೆ ಅತೀ ಅಗತ್ಯ.
    ‘ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ದಂತ ವೈದ್ಯರ ಪಾತ್ರ’
    ಒಂದು ಆರೋಗ್ಯ ಪೂರ್ಣ ಸಮಾಜದ ನಿರ್ಮಾಣದಲ್ಲಿ ಆ ಸಮಾಜದ ಪ್ರತಿಯೊಬ್ಬ ವ್ಯಕ್ತಿಯೂ ಪಾಲುದಾರನಾಗುತ್ತಾನೆ ಮತ್ತು ಹೊಣೆಗಾರನಾಗುತ್ತಾನೆ. ಅಂತಹ ಪ್ರತಿ ಪ್ರಜೆಗಳ ಆರೋಗ್ಯವನ್ನು ಕಾಪಾಡುವಲ್ಲಿ ವೈದ್ಯರು ಬಹುಮುಖ್ಯ ಭೂಮಿಕೆ ವಹಿಸುತ್ತಾರೆ. ಅದು ಕುಟುಂಬ ವೈದ್ಯರೇ ಇರಬಹುದು, ಅಲೋಪತಿ, ಆಯುರ್ವೇದ, ಹೊಮಿಯೋಪತಿ, ಯುನಾನಿ ಅಥವಾ ದಂತ ವೈದ್ಯರೂ ಇರಬಹುದು. ಒಟ್ಟಿನಲ್ಲಿ ವೈದ್ಯರು ಒಬ್ಬ ವ್ಯಕ್ತಿಯ ಆರೋಗ್ಯದ ಮೇಲೆ ನೇರವಾದ ಮತ್ತು ಪ್ರತ್ಯಕ್ಷವಾದ ಪರಿಣಾಮ ಬೀರುವ ವ್ಯಕ್ತಿ ಅಂದರೆ ವೈದ್ಯರೇ ಆಗಿರುತ್ತಾರೆ. ಇನ್ನು ಒಬ್ಬ ವ್ಯಕ್ತಿಯ ಸರ್ವತೋಮುಖ ಬೆಳವಣಿಗೆಗೆ ಹಲ್ಲಿನ ಆರೋಗ್ಯವೂ ಅತೀ ಅವಶ್ಯಕ. ಬಾಯಿ ಎನ್ನುವುದು ನಮ್ಮ ದೇಹದ ಪ್ರವೇಶ ದ್ವಾರವಿದ್ದಂತೆ. ಜೀರ್ಣಾಂಗ ವ್ಯೂಹದ ಹೊಸ್ತಿಲೇ ನಮ್ಮ ಬಾಯಿ ಆಗಿರುತ್ತದೆ. ಇಂತಹ ಬಾಹಿಯಲ್ಲಿ ಆರೋಗ್ಯವಂತ ಹಲ್ಲುಗಳು ಇಲ್ಲದಿದ್ದಲ್ಲಿ ಪ್ರಥಮ ಚುಂಬನo ದಂತಭಗ್ನo ಎಂಬoತೆ ಜೀರ್ಣಾಂಗ ವ್ಯವಸ್ಥೆಯ ಹಳಿ ತಪ್ಪುವುದಂತೂ ಖಂಡಿತಾ. ಹಲ್ಲಿನ ಆರೋಗ್ಯ ಚೆನ್ನಾಗಿದ್ದಲ್ಲಿ ಮಾತ್ರ ಮನುಷ್ಯನ ದೈಹಿಕ ಮತ್ತು ಮಾನಸಿಕ ಬೆಳವಣಿಗೆ ಪರಿಪೂರ್ಣವಾಗಲು ಸಾಧ್ಯವಾಗುತ್ತದೆ. ಈ ಕಾರಣದಿಂದ ಹಲ್ಲುಗಳ ಆರೋಗ್ಯ ನಿರ್ಲಕ್ಷಿಸಿದರೆ, ನಿಮ್ಮ ಆರೋಗ್ಯದ ಮೇಲೆ ಋಣಾತ್ಮಕ ಪರಿಣಾಮ ಉಂಟಾಗುವುದು ಸಹಜ.

ದಂತ ವೈದ್ಯರ ಪಾತ್ರ:
ಬಾಯಿ ಎನ್ನುವುದು ಬ್ಯಾಕ್ಟೀರಿಯಾಗಳ ಗುಂಡಿ. ಲಕ್ಷಾಂತರ ಬ್ಯಾಕ್ಟೀರಿಯಗಳು ಮತ್ತು ವೈರಾಣುಗಳು ಬಾಯಿಯಲ್ಲಿ ಮನೆ ಮಾಡಿ ಸಂಸಾರ ನಿರ್ವಹಣೆ ಮಾಡಿಕೊಂಡಿರುತ್ತದೆ. ಯಾವಾಗ ದೇಹದ ರಕ್ಷಣಾ ವ್ಯವಸ್ಥೆ ಕುಸಿದಾಗ, ಅವುಗಳು ತಮ್ಮ ನಿಜರೂಪ ತೋರಿಸುತ್ತದೆ ಮತ್ತು ರೋಗ ಬರುವಂತೆ ಮಾಡುತ್ತದೆ. ಒಬ್ಬ ರೋಗಿ ಬಾಯಿ ತೆರೆದಾಗ, ದಂತವೈದ್ಯರು ಆತನ ಬಾಯಿಯಲ್ಲಿ ಬರೀ ಹಲ್ಲನ್ನು ಮಾತ್ರ ನೋಡುವುದಿಲ್ಲ. ಯಶೋಧೆಯು ಕೃಷ್ಣನ ಬಾಯಿಯನ್ನು ತೆರೆಸಿ (ಮಣ್ಣು ತಿಂದಾಗ) ಬ್ರಹ್ಮಾಂಡವನ್ನು ಕಂಡಳು ಎಂಬುದಾಗಿ ನಮ್ಮ ಪುರಾಣ ಕಥೆಗಳಲ್ಲಿ ದಾಖಲಾಗಿದೆ. ಅದೇ ರೀತಿ ಕಲಿಯುಗದಲ್ಲಿ ರೋಗಿಯು ಬಾಯಿ ತೆರೆದಾಗ ದಂತ ವೈದ್ಯರು ರೊಗಿಯ ಬಾಯಿಯಲ್ಲಿ ಹತ್ತು ಹಲವಾರು ರೋಗದ ಲಕ್ಷಣಗಳನ್ನು ಗುರುತಿಸಿ ರೊಗವನ್ನು ಪತ್ತೆ ಹಚ್ಚುತ್ತಾರೆ. ರೋಗಿಯ ಬಾಯಿಯಲ್ಲಿ ದಂತ ವೈದ್ಯರು ಪತ್ತೆ ಹಚ್ಚಬಹುದಾದ ರೋಗಗಳು ಯಾವುದೆಂದರೆ ಮಧುಮೇಹ ರೋಗ, ಅಧಿಕ ರಕ್ತದೊತ್ತಡ, ಅನೀಮಿಯಾ ಅಥವಾ ರಕ್ತಹೀನತೆ, ಬಾಯಿ ಕ್ಯಾನ್ಸರ್, ರಕ್ತದ ಕ್ಯಾನ್ಸರ್, ವಿಟಮಿನ್ ಕೊರತೆ, ಶಿಲೀಂದ್ರಗಳ ಸೋಂಕು, ಲಿವರ್ ತೊಂದರೆ, ಗ್ಯಾಸ್ಟಿçಕ್ ಸಮಸ್ಯೆ, ಶ್ವಾಸಕೋಶದ ಕೀವು, ಏಡ್ಸ್ ರೋಗ, ರಕ್ತದ ಕಾಯಿಲೆಗಳು, ಮಾನಸಿಕ ಒತ್ತಡ, ಔಷದಿಗಳ ದುಷ್ಪರಿಣಾಮ, ಅಪಸ್ಮಾರ ರೋಗ, ಹೆಪಟೈಟಿಸ್, ಜಾಂಡೀಸ್, ವೈರಾಣು ಸೋಂಕು, ಥೈರಾಯ್ಡ್ ಸಮಸ್ಯೆ, ರಸದೂತಗಳ ಏರುಪೇರು, ಡೆಂಗ್ಯೂ ಜ್ವರ, ಚಿಕುನ್ ಗುನ್ಯಾ ಜ್ವರ ಮತ್ತು ನಿದ್ರಾಹೀನತೆ
ಈ ಎಲ್ಲಾ ರೋಗಗಳು ಒಂದಲ್ಲ ಒಂದು ರೀತಿಯಲ್ಲಿ ಬೇರೆ ಬೇರೆ ರೂಪಗಳಲ್ಲಿ ಬಾಯಿಯಲ್ಲಿ ಪ್ರಕಟಗೊಳ್ಳುತ್ತದೆ.
ಉದಾಹರಣೆಗೆ ಮಧುಮೇಹ ರೋಗದಲ್ಲಿ ಹಲ್ಲಿನ ವಸಡಿನ ಸುತ್ತ ಕೀವು ತುಂಬಿ, ಹಲ್ಲಿನ ಸುತ್ತಲಿನ ದಂತದಾರ ಎಲುಬು ಕರಗಿ ಹಲ್ಲು ಅಲುಗಾಡುತ್ತದೆ ಮತ್ತು ಬಾಯಿ ವಿಪರೀತ ವಾಸನೆ ಹೊಂದಿರುತ್ತದೆ. ರಕ್ತಹೀನತೆ ಇರುವವರಲ್ಲಿ ಬಾಯಿ ಒಳ ಭಾಗದ ಪದರ ಬಿಳಿಚಿಕೊಂಡಿರುತ್ತದೆ. ಬಾಯಿ ಕ್ಯಾನ್ಸರ್ ಇದ್ದಲ್ಲಿ ಬಾಯಿಯೊಳಗೆ ಗಡ್ಡೆ ಅಥವಾ ಒಣಗದ ಹುಣ್ಣು ಇರುತ್ತದೆ. ರಕ್ತದ ಕ್ಯಾನ್ಸರ್ ಇದ್ದಲ್ಲಿ ವಸಡಿನಲ್ಲಿ ರಕ್ತ ಒಸರುತ್ತಿರುತ್ತದೆ. ವಿಟಮಿನ್ ಸಿ ಕೊರತೆ ಇದ್ದಲ್ಲಿ ವಸಡಿನಲ್ಲಿ ರಕ್ತಸ್ರಾವ, ವಿಟಮಿನ್ ಬಿ ಕಾಂಪ್ಲೆಕ್ಸ್ ಕೊರತೆ ಇದ್ದಲ್ಲಿ ಬೋಳು ನಾಲಗೆ ಇರುತ್ತದೆ. ಶಿಲೀಂಥ್ರಗಳ ಸೋಂಕು ಇದ್ದಲ್ಲಿ ನಾಲಿಗೆ ಮೇಲೆ ಬಿಳಿ ಪದರ ಇರುತ್ತದೆ. ಅದನ್ನು ಕ್ಯಾಂಡಿಡಿಯೋಸಿಸ್ ಎನ್ನುತ್ತಾರೆ. ಸಾಮಾನ್ಯವಾಗಿ ಅತೀ ಹೆಚ್ಚು ಆಂಟಿಬಯೋಟಿಕ್ ಬಳಸುವವರಲ್ಲಿ, ಸ್ಟೀರಾಯ್ಡ್ ಸೇವಿಸುವವರಲ್ಲಿ, ದೇಹದ ರಕ್ಷಣಾ ವ್ಯವಸ್ಥೆ ಕುಸಿದವರಲ್ಲಿ ಇದು ಹೆಚ್ಚು ಕಂಡುಬರುತ್ತದೆ. ಅಧಿಕ ರಕ್ತದೊತ್ತಡ ಮತ್ತು ಅಪಸ್ಮಾರ ರೋಗಕ್ಕೆ ಔಷದಿ ಸೇವಿಸುವವರಲ್ಲಿ ವಸಡುಗಳು ಅಡ್ಡಾದಿಡ್ಡಿಯಾಗಿ ಬೆಳೆಯುತ್ತಿದೆ. ಲಿವರ್ ತೊಂದರೆ ಇದ್ದಲ್ಲಿ ವಸಡಿನಲ್ಲಿ ರಕ್ತಸ್ರಾವ, ಮಾನಸಿಕ ಒತ್ತಡ ಇದ್ದಲ್ಲಿ ಬಾಯಿಯಲ್ಲಿ ಹುಣ್ಣು, ಜಾಂಡಿಸ್ ಇದ್ದಲ್ಲಿ ಬಾಯಿ ನಾಲಗೆ ಹಳದಿ ಬಣ್ಣಕ್ಕೆ ತಿರುಗುತ್ತದೆ. ಡೆಂಗ್ಯೂ ಜ್ವರ ಮತ್ತು ಚಿಕನ್ ಗುನ್ಯಾ ಜ್ವರ ಇದ್ದಲ್ಲಿ ಪ್ಲೇಟ್‌ಲೇಟ್‌ಗಳ ಸಂಖ್ಯೆ ಕಡಿಮೆಯಾಗಿ ವಸಡಿನಲ್ಲಿ ರಕ್ತಸ್ರಾವ ಉಂಟಾಗುತ್ತದೆ. ಗ್ಯಾಸ್ಟ್ರಿಕ್ ಸಮಸ್ಯೆ ಇದ್ದಲ್ಲಿ ಹಲ್ಲು ಸವೆದು ಹೋಗಿ ದಂತ ಅತಿ ಸಂವೇದನೆ ಇರುತ್ತದೆ. ಶ್ವಾಸಕೋಶದ ಕೀವು ಮತ್ತು ಸೋಂಕು ಇದ್ದಲ್ಲಿ ವಿಪರೀತ ಬಾಯಿ ವಾಸನೆ ಇರುತ್ತದೆ. ಏಡ್ಸ್ ರೋಗ ಇದ್ದಲ್ಲಿ ನಾಲಗೆ ಮೇಲೆ ಬಿಳಿ ಕೂದಲು ಬೆಳೆಯುತ್ತದೆ.
ಬದಲಾದ ದಂತ ಚಿಕಿತ್ಸೆಯ ಸ್ವರೂಪ
ಹಿಂದಿನ ಕಾಲದಲ್ಲಿ ದಂತ ವೈದ್ಯರು ಎಂದರೆ ಕೇವಲ ಹಲ್ಲು ತೆಗೆಯಲು ಮಾತ್ರ ಸೀಮಿತವಾಗಿದ್ದರು. ಆದರೆ ಈಗ ವಿಜ್ಞಾನ ತಂತ್ರಜ್ಞಾನ ಬೆಳೆದಂತೆ ಹೊಸ ಹೊಸ ಆವಿಷ್ಕಾರಗಳು ಬಂದಿದೆ. ಮೂರನೇ ದವಡೆ ಹಲ್ಲಿನ ಒಳಭಾಗ ದಂತ ಮಜ್ಜೆಯ ಒಳಗಿನ ಆಕಾರ ಕೋಶ ಜೀವಕೋಶಗಳಿಂದ ಹೊಸತಾದ ಹಲ್ಲನ್ನು ಸೃಷ್ಟಿ ಮಾಡುವಲ್ಲಿಯವರೆಗೆ ದಂತ ವೈದ್ಯ ವಿಜ್ಞಾನ ಬೆಳೆದಿದೆ. ಈಗ ದಂತ ಚಿಕಿತ್ಸೆ ಕೇವಲ ರೋಗ ಚಿಕಿತ್ಸೆ ಪದ್ಧತಿಯಾಗಿ ಉಳಿಯದೆ, ರೋಗ ಬರದಂತೆ ತಡೆಯುವ ಪ್ರಕ್ರಿಯೆಗೆ ಹೆಚ್ಚು ಒತ್ತು ನೀಡಲಾಗಿದೆ. ನಿಯಮಿತವಾದ ದಂತ ತಪಾಸಣೆ, ದಂತ ಶುಚಿಗೊಳಿಸುವಿಕೆ, ಹಲ್ಲು ತುಂಬಿಸುವಿಕೆಯಿoದ ಹಲ್ಲು ಹುಳುಕಾಗದಂತೆ ಮಾಡುವ ಪ್ರಕ್ರಿಯೆಗೆ ಹೆಚ್ಚು ಒತ್ತು ನೀಡಲಾಗಿದೆ. ಜೊತೆಗೆ ಸೌಂದರ್ಯ ವರ್ಧಕ ಚಿಕಿತ್ಸೆಯಾಗಿ ಬದಲಾಗಿದೆ. ಹಲ್ಲಿನ ಅಂದವನ್ನು ವಿನೀರ್, ಕಿರೀಟ(ಕ್ರೌನ್) ಮತ್ತು ಹೊಸತಾದ ಸಿಮೆಂಟ್ ಗಳಿಂದ ತುಂಬಿಸಿ, ವ್ಯಕ್ತಿಯ ನಗುವಿನ ವಿನ್ಯಾಸವನ್ನೇ ಬದಲಿಸಿ, ಆತನ ಜೀವನದ ದೃಷ್ಟಿಕೋನವನ್ನೇ ಬದಲಾಯಿಸುವ ಕಾಲದಲ್ಲಿ ನಾವಿದ್ದೇವೆ. ಹಿಂಜರಿಕೆ, ಕೀಳರಿಮೆ ಹೋಗಿ ಹೊಸ ಆತ್ಮ ವಿಶ್ವಾಸ ಬಂದು, ಆ ವ್ಯಕ್ತಿಯ ಜೀವನದ ದೃಷ್ಟಿಕೋನ ಬದಲಾಗಿ, ಆತ್ಮ ವಿಶ್ವಾಸ ಹೆಚ್ಚಿ, ಹೊಸತಾದ ಮರುಜನ್ಮ ನೀಡಲಾಗುತ್ತದೆ. ಚಿಕಿತ್ಸೆಗೆ ಹೆಚ್ಚು ಒತ್ತು ನೀಡುತ್ತಿದ್ದ ದಂತ ಚಿಕಿತ್ಸಾ ಪದ್ಧತಿ ಈಗ ಹೆಚ್ಚು ರೋಗ ತಡೆಯುವ ಚಿಕಿತ್ಸೆಯಾಗಿ ಪರಿವರ್ತನೆಯಾಗಿದೆ. ದಂತ ಚಿಕಿತ್ಸಾಲಯಗಳು ಬದಲಾಗಿ ಈಗ ದಂತ ಸ್ಪಾಗಳು ಹುಟ್ಟಿಕೊಂಡಿದೆ. ಒಟ್ಟು ಒಬ್ಬ ವ್ಯಕ್ತಿಯ ದೈಹಿಕ, ಮಾನಸಿಕ ಮತ್ತು ಪರಿಪೂರ್ಣ ಬೆಳವಣಿಗೆಯಲ್ಲಿ ಹಲ್ಲುಗಳ ಪಾತ್ರ ಬಹಳ ಮುಖ್ಯವಾಗಿದೆ. ಒಟ್ಟಿನಲ್ಲಿ ಸುಂದರ ಸದೃಢವಾದ ಹಲ್ಲುಗಳು ಮನುಷ್ಯನ ಆತ್ಮ ವಿಶ್ವಾಸದ ಮತ್ತು ವ್ಯಕ್ತಿತ್ವದ ಪ್ರತೀಕ. ಸುಂದರವಾಗಿ ನಗಲು, ಆಹಾರ ಜಗಿಯಲು, ಸ್ಪಷ್ಟವಾಗಿ ಮಾತನಾಡಲು ಮತ್ತು ದೇಹದ ಆರೋಗ್ಯದ ಸಮತೋಲನವನ್ನು ಕಾಪಾಡಲು ಹಲ್ಲಿನ ಆರೋಗ್ಯ ಅತೀ ಅವಶ್ಯಕ. ಈ ನಿಟ್ಟಿನಲ್ಲಿ ವ್ಯಕ್ತಿಯ ಆರೋಗ್ಯ ಪಾಲನೆಯಲ್ಲಿ ದಂತ ವೈದ್ಯರ ಪಾತ್ರ ಅತ್ಯಂತ ಮಹತ್ವದ್ದಾಗಿದೆ.
ಕೊನೆಮಾತು:
ಆರೋಗ್ಯ ಎಂದರೆ ಮಾರುಕಟ್ಟೆಯಲ್ಲಿ ಸಿಗುವ ವಸ್ತು ಅಲ್ಲ ಎಂಬ ಸತ್ಯವನ್ನು ಜನರು ಅರ್ಥ ಮಾಡಿಕೊಳ್ಳಬೇಕು. ಮಾತ್ರೆ ಅಥವಾ ಗುಳಿಗೆ ತಿಂದು ದೇಹದ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ತಿಳಿದರೆ ಅದು ಮೂರ್ಖತನದ ಪರಮಾವಧಿ “ Healthis not absence of disease” Health is enthusiasm to work” ರೋಗವಿಲ್ಲದವನೇ ಆರೋಗ್ಯವಂತ ಎನ್ನುವುದು ತಪ್ಪುಕಲ್ಪನೆ. ರೋಗವಿದ್ದರೂ ಜೀವನದಲ್ಲಿ ಉಲ್ಲಾಸ, ಉಲ್ಲಸಿತನಾಗಿ ಇರುವವನು ಮತ್ತು ತಾನು ಮಾಡುವ ಕೆಲಸದಲ್ಲಿ ಸಂತಸ ಮತ್ತು ನೆಮ್ಮದಿ ಪಡೆಯುವವನೇ ನಿಜವಾದ ಆರೋಗ್ಯವಂತ. ವಿಶ್ವ ಸಂಸ್ಥೆಯ ವರದಿ ಪ್ರಕಾರ ನಮ್ಮ ಭಾರತ ದೇಶದಲ್ಲಿ ಪ್ರತಿ 10 ರಲ್ಲಿ ಒಬ್ಬ ಮಧುಮೇಹ ಮತ್ತು 15 ರಲ್ಲಿ ಒಬ್ಬ ಅಧಿಕ ರಕ್ತದೊತ್ತಡ ಹೊಂದಿರುತ್ತಾನೆ. ಬರೀ ಆಸ್ಪತ್ರೆ ಕಟ್ಟಿಸಿ ಆರೋಗ್ಯವಂತ ಸಮಾಜವನ್ನು ನಿರ್ಮಾಣ ಮಾಡಬಹುದು ಎಂದರೆ ಅದು ಭ್ರಮೆಯಾದೀತು. ವೈದ್ಯಕೀಯ ಕಾಲೇಜುಗಳನ್ನು ಇನ್ನಷ್ಟು ಹೆಚ್ಚಿಸಿ, ಹೆಚ್ಚಿನ ಸಂಖ್ಯೆಯಲ್ಲಿ ವೈದ್ಯರನ್ನು ಉತ್ಪಾದಿಸಿ ದೇಶದ ಆರೋಗ್ಯವನ್ನು ವೃದ್ಧಿಸಬಹುದು ಎನ್ನುವುದೂ ಕೂಡಾ ಮೂರ್ಖತನ, ಈಗ ನಮಗೆ ಬೇಕಾಗಿರುವುದು ಶುದ್ಧ ಗಾಳಿ, ಶುದ್ಧ ನೀರು ಮತ್ತು ಸುಂದರ ಪರಿಸರ. ಎಲ್ಲರಿಗೂ ಶುದ್ಧ ನೀರು, ಕಲುಷಿತವಲ್ಲದ ಗಾಳಿ ಮತ್ತು ಆಹಾರ ದೊರಕಿ, ಜೊತೆಗೆ ಹಸಿರು ತುಂಬಿದ ಪರಿಸರ ನಿರ್ಮಿಸಿದರೆ, ಆರೋಗ್ಯವಂತ ಸಮಾಜ ಮತ್ತು ಸ್ವಾಸ್ಥ್ಯ ಸಮಾಜ ನಿರ್ಮಾಣ ಮಾಡಲು ಸಾಧ್ಯವಿದೆ. ಇಲ್ಲದಿದ್ದರೆ ಎಲ್ಲರಿಗೂ ಆರೋಗ್ಯ ಎನ್ನುವುದು ಮರಿಚಿಕೆಯಾಗಿಯೇ ಉಳಿಯಬಹುದು. ಜೀವನ ಶೈಲಿ ಬದಲಾವಣೆ, ಆಹಾರ ಪದ್ಧತಿ ಬದಲಾವಣೆ, ಪರಿಶುದ್ಧ ಪರಿಸರ ನಿರ್ಮಿಸಿದರೆ ಮಾತ್ರ ಸ್ವಾಸ್ಥ್ಯ ಸಮಾಜ ನಿರ್ಮಾಣವಾಗಲು ಸಾಧ್ಯವಿದೆ. ಇದರ ಜೊತೆಗೆ ಎಲ್ಲ ವೈದ್ಯ ಪದ್ಧತಿಗಳಾದ ಆಯುರ್ವೇದ, ಹೊಮಿಯೋಪತಿ, ಯುನಾನಿ, ಅಲೋಪತಿ ಎಲ್ಲರೂ ಒಟ್ಟು ಸೇರಿ ಪರಸ್ಪರ ಪೂರಕವಾಗಿ ಕೆಲಸ ಮಾಡಿದರೆ ಮಾತ್ರ, ಸ್ವಾಸ್ಥ್ಯ ಭಾರತದ ನಿರ್ಮಾಣ ಸಾಧ್ಯವಾಗಬಹುದು.

ಡಾ|| ಮುರಲೀ ಮೋಹನ್‌ಚೂಂತಾರು

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!