
ಭಾರತೀಯ ಜನತಾ ಪಾರ್ಟಿಯ ಸುಳ್ಯ ವಿಧಾನಸಭಾ ಕ್ಷೇತ್ರದ ಚುನಾಯಿತ ಸಹಕಾರಿಗಳ ಸಮಾವೇಶವು ಮೇ.17ರಂದು ಸುಳ್ಯ ಸಿ.ಎ. ಬ್ಯಾಂಕ್ ಸಭಾಂಗಣದಲ್ಲಿ ನಡೆಯಲಿದ್ದು, ಕಾರ್ಯಕ್ರಮಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಹಿತ ಇತರ ನಾಯಕರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಮಾಹಿತಿ ನೀಡಿದ್ದಾರೆ.
ಮೇ.10ರಂದು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಕಾರ್ಯಕ್ರಮದ ಮಾಹಿತಿ ನೀಡಿದ ಅವರು, ಬಿಜೆಪಿ ಬೆಂಬಲಿತರಾಗಿ ಸಹಕಾರಿ ಸಂಘದ ಚುನಾವಣೆಯಲ್ಲಿ ಸ್ಪರ್ಧಿಸಿ ವಿಜೇತರಾಗಿರುವ ಸಹಕಾರಿಗಳ ಸಮಾವೇಶ ಮೇ.17ರಂದು ನಡೆಯಲಿದೆ. ಸಹಕಾರಿಗಳು ಸಹಕಾರಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವ ಅವಕಾಶಗಳು, ಸಮಾಜಮುಖಿಯಾಗಿ ತೊಡಗಿಸಿಕೊಳ್ಳುವ ವಿಚಾರದ ಬಗ್ಗೆ ಎರಡು ಗೋಷ್ಠಿಗಳು ನಡೆಯಲಿದೆ. ವಿಧಾನ ಪರಿಷತ್ ಸದಸ್ಯರಾದ ಪ್ರತಾಪ ಸಿಂಹ ನಾಯಕ್, ಕ್ಯಾಂಸ್ಕೋ ಸಂಸ್ಥೆಯ ಮಾಜಿ ಅಧ್ಯಕ್ಷ ಸತೀಶ್ಚಂದ್ರ ಎಸ್.ಆರ್. ರವರು ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲಿದ್ದಾರೆ. ಸುಮಾರು 350 ಕ್ಕೂ ಅಧಿಕ ಸಹಕಾರಿಗಳು ಭಾಗವಹಿಸುವರು ಎಂದು ಹೇಳಿದರು.
ಸುಳ್ಯ ಸಿ.ಎ. ಬ್ಯಾಂಕ್ ನಲ್ಲಿ ಸಹಕಾರಿಗಳ ಸಮಾವೇಶ ಮುಗಿದ ಬಳಿಕ, ಸುಳ್ಯ ಜಯನಗರದ ಕೊರಂಬಡ್ಕ ದೈವಸ್ಥಾನದಲ್ಲಿ ಅಲ್ಲಿಯ ಬೂತ್ ಸಮಿತಿಯವರು ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕು ಮತ್ತು ನರೇಂದ್ರ ಮೋದಿಯವರು ಪ್ರಧಾನಿಯಾಗಬೇಕೆಂದು ದೈವಸ್ಥಾನದಲ್ಲಿ ಹರಕೆ ಹೇಳಿಕೊಂಡಿದ್ದರು. ಅದೇ ದಿನ ಹರಕೆಯ ನೇಮೋತ್ಸವ ನಡೆಯಲಿದ್ದು ರಾಜ್ಯಾಧ್ಯಕ್ಷರು ಆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಪ್ರಸಾದ ಸ್ವೀಕರಿಸಲಿದ್ದಾರೆ. ಅಲ್ಲಿಯೂ ಸಭೆ ನಡೆಯುವುದು.
ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕಿ ಭಾಗೀರಥಿ ಮುರುಳ್ಯ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಮಾಜಿ ಸಚಿವ ಎಸ್.ಅಂಗಾರ ಸಹಿತ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದವರು ಹೇಳಿದರು.
ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಭಾರತದ ಸೇನೆ ಯಶಸ್ವಿಯಾಗಿದ್ದು, ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆಯುವ ಈ ಸಮರದಲ್ಲಿ ಭಾರತಕ್ಕೆ ಎಲ್ಲ ಹಂತದಲ್ಲಿಯೂ ಜಯ ಸಿಗುತ್ತದೆ. ಆ ನಿಟ್ಟಿನಲ್ಲಿ ಪ್ರಾರ್ಥನೆಗಳು ನಡೆಯುತ್ತಿದೆ ಎಂದು ವೆಂಕಟ್ ವಳಲಂಬೆ ಹಾಗೂ ಬಿಜೆಪಿ ಮಂಡಲ ಸಮಿತಿ ಪ್ರಧಾನ ಕಾರ್ಯದರ್ಶಿ ವಿನಯಕುಮಾರ್ ಕಂದಡ್ಕ ತಿಳಿಸಿದರು.
ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶ್ರೀಕಾಂತ್ ಮಾವಿನಕಟ್ಟೆ, ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ನಾರಾಯಣ ಶಾಂತಿನಗರ, ಸುಳ್ಯ ಸಿ.ಎ.ಬ್ಯಾಂಕ್ ಅಧ್ಯಕ್ಷ ವಿಕ್ರಂ ಅಡ್ಪಂಗಾಯ ಇದ್ದರು.